
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಸವಿತಾ ಸಮಾಜದ ಕಿಶೋರ್ ಕುಮಾರ್ ಪುತ್ತೂರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇದರೊಂದಿಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ಗೆ ಮುಖಭಂಗವಾಗಿದೆ. ಲೋಕಾಸಭಾ ಚುನಾವಣೆಯಲ್ಲೂ ಸಹ ಟಿಕೆಟ್ ಮಿಸ್ ಆಗಿತ್ತು, ಇದೀಗ ವಿಧಾನಪರಿಷತ್ ಉಚಪಾವಣೆಯ ಟಿಕೆಟ್ ಸಹ ಕೈತಪ್ಪಿದೆ.
ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಮರು ಚುನಾವಣೆ ಅ.21 ರಂದು ನಿಗದಿಯಾಗಿದ್ದು, ಬಿಜೆಪಿ ಗೆದ್ದಿದ್ದ ಕ್ಷೇತ್ರವಾಗಿರುವ ಹಿನ್ನೆಲೆಯಲ್ಲಿ ಟಿಕೆಟ್ ಬಿಜೆಪಿ ಪಾಲಿಗೆ ಸಿಕ್ಕಿದ್ದು ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುತ್ತಿದೆ. ಹಾಗಾಗಿ ಈ ಬಾರಿ ಗೆಲ್ಲುವ ಸಾಧ್ಯತೆ ಬಿಜೆಪಿಗೇ ಹೆಚ್ಚಾಗಿದೆ. ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿತ್ತು.
.
.