32 C
Mumbai
April 24, 2026
Mumbai News Kannada
ಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ





“ಪಟ್ಲ ಸತೀಶ್ ಶೆಟ್ಟಿ ಅವರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ” – ಡಾ.ಕೆ.ಪ್ರಕಾಶ್ ಶೆಟ್ಟಿ 

 

ಚಿತ್ರ ವರದಿ : ದಿನೇಶ್ ಕುಲಾಲ್ 

ಮಂಗಳೂರು ಡಿ 29.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ಜರುಗಿತು. 

ಸಭೆಯನ್ನು ಉದ್ದೇಶಿಸಿ ಮಾತಾಡಿದ ಎಂ.ಆರ್.ಜಿ. ಗ್ರೂಫ್ ಚೇರ್ ಮೆನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ ಕಂಪನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ ಕೀರ್ತಿ ಪಟ್ಲ ಸತೀಶ್ ಶೆಟ್ಟಿಯವರದ್ದಾಗಿದೆ. ಯಕ್ಷಗಾನ ಕಲಾವಿದರಿಗೆ ಸದಾ ಬೆಂಬಲ ನೀಡುತ್ತಿರುವ ಪಟ್ಲರ ಕಾರ್ಯಕ್ರಮಕ್ಕೆ ನಾವೆಲ್ಲರೂ ಸಹಾಯ ಸಹಕಾರ ನೀಡಬೇಕು. ಜೂನ್ 1ರಂದು ನಡೆಯಲಿರುವ ದಶಮಾನೋತ್ಸವ ಕಾರ್ಯಕ್ರಮ ಅವಿಸ್ಮರಣೀಯವಾಗಿಸಲು ನಾವೆಲ್ಲರೂ ಒಗ್ಗೂಡಿ ದುಡಿಯಬೇಕು“ ಎಂದರು.

ಟ್ರಸ್ಟ್ ನ ಮಹಾದಾನಿ, ಮುಂಬೈನ ಹೇರಂಭ ಇಂಡಸ್ಟ್ರಿಸ್ ಕಾರ್ಯ ನಿರ್ವಹಣಾಧಿಕಾರಿ ಕನ್ಯಾನ ಸದಾಶಿವ ಶೆಟ್ಟಿ ಮಾತಾಡಿ, “ನೂರಾರು ವರ್ಷಗಳ ಇತಿಹಾಸವಿರುವ ಯಕ್ಷಗಾನ ಕಲೆಗೆ ಕಳೆದ 10 ವರ್ಷಗಳಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾನಮಾನವನ್ನು ನೀಡಿದೆ. ನಮ್ಮೆಲ್ಲರನ್ನು ಒಗ್ಗೂಡಿಸಿಕೊಂಡು ಭಾಗವತ ಪಟ್ಲರು ಪ್ರತೀವರ್ಷ ಕಲಾವಿದರ ನೆರವಿಗಾಗಿ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಈ ಬಾರಿಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತ್ಯೇಕ ಕಮಿಟಿ ರಚಿಸಿಕೊಂಡು ಕೆಲಸ ಮಾಡಬೇಕು. ಈಗಿನ 9 ವರ್ಷಗಳಲ್ಲಿ ಮಾಡಿರುವ ಶ್ಲಾಘನೀಯ ಕಾರ್ಯ ಮುಂದೆಯೂ ನಡೆಯಲಿ“ ಎಂದರು.

ಪ್ರಾಸ್ತಾವಿಕ ಮಾತನ್ನಾಡಿದ ಟ್ರಸ್ಟ್ ಪ್ರಧಾನ ಸಂಚಾಲಕ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, “ಪಟ್ಲ ಫೌಂಡೇಶನ್ ನ ಕಳೆದ 9 ವರ್ಷಗಳ ಕಾರ್ಯಕ್ರಮಗಳಲ್ಲಿ ನಾನು ಪಾಲ್ಗೊಂಡಿದ್ದೇನೆ. ನನಗೆ ಕಟೀಲು ದೇವಿ ನೀಡಿರುವ ಅನುಗ್ರಹದಿಂದ ಸಾಧ್ಯವಾಗಿದೆ. ಸಮಾಜದ ಬಡವರ, ನೊಂದವರ ನೆರವಿಗಾಗಿ ಕಟೀಲು ಕ್ಷೇತ್ರದಲ್ಲಿ 9 ವರ್ಷಗಳ ಹಿಂದೆ ಪಟ್ಲ ಫೌಂಡೇಶನ್ ಸ್ಥಾಪನೆಯಾಯಿತು. ಕೇವಲ ಯಕ್ಷಗಾನ ಕಲಾವಿದರ ಹಿತರಕ್ಷಣೆಗಾಗಿ ಪ್ರಾರಂಭವಾಗಿದ್ದ ಈ ಸಂಘಟನೆಯು ಇಂದು ಸಮಾಜದ ಎಲ್ಲ ವರ್ಗದ ಜನರ ಕಣ್ಣೀರು ಒರೆಸುವಲ್ಲಿ ಯಶಸ್ವಿಯಾಗಿದೆ. ಟ್ರಸ್ಟ್ ದಶಮಾನೋತ್ಸವ ಕಾರ್ಯಕ್ರಮ ವಿಭಿನ್ನ ರೀತಿಯಲ್ಲಿ ನಡೆಯಬೇಕು. ಜನಮಾನಸದಲ್ಲಿ ಮರೆಯದ ರೀತಿಯಲ್ಲಿ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅರ್ಥಪೂರ್ಣವಾಗಿಸಬೇಕು“ ಎಂದರು. 

ಯಕ್ಷಧ್ರುವ ಪಟ್ಲ ಫೌಂಡೇಶನ್ ಸಂಸ್ಥಾಪಕ ಪಟ್ಲ ಸತೀಶ್ ಶೆಟ್ಟಿಯವರು ಮಾತಾಡಿ, “ದಾನಿಗಳು ನೀಡಿರುವ ಸಹಕಾರದಿಂದ ನಮ್ಮ ಟ್ರಸ್ಟ್ ಯಶಸ್ವಿಯಾಗಿ ನಡೆಯುತ್ತಿದೆ. ಪಟ್ಲ ಟ್ರಸ್ಟ್ ನ ಯಕ್ಷ ಶಿಕ್ಷಣ ಅಭಿಯಾನದಡಿಯಲ್ಲಿ 6 ಜಿಲ್ಲೆಗಳ ಮಕ್ಕಳಿಗೆ ಕಳೆದ 4 ವರ್ಷಗಳಲ್ಲಿ ಸುಮಾರು 9000 ಮಕ್ಕಳಿಗೆ ಯಕ್ಷ ಶಿಕ್ಷಣ ನೀಡುತ್ತಿದೆ. ಇದೇ ತಿಂಗಳ 31ರಂದು 21 ಶಾಲೆಗಳ ಒಟ್ಟು 929 ಮಕ್ಕಳು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಒಡ್ಡೂರು ಫಾರ್ಮ್ ನಲ್ಲಿ ಯಕ್ಷಗಾನ ರಂಗಪ್ರವೇಶ ಮಾಡಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ. ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಈ ಕಾರ್ಯಕ್ರಮದ ನೇತೃತ್ವವನ್ನು ವಹಿಸಲಿದ್ದಾರೆ“ ಎಂದರು.

ಟ್ರಸ್ಟ್ ನ ಪುರುಷೋತ್ತಮ ಭಂಡಾರಿ ಅವರು ಮಾತಾಡಿ, “ಪಟ್ಲ ಫೌಂಡೇಶನ್ 9 ವರ್ಷಗಳಲ್ಲಿ ಟ್ರಸ್ಟ್ 15 ಕೋಟಿ ರೂ.ನಷ್ಟು ಹಣವನ್ನು ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗ ಮಾಡಿದೆ. ಕನ್ಯಾನ ಸದಾಶಿವ ಶೆಟ್ಟಿಯವರು ಟ್ರಸ್ಟ್ ಗೌರವ ಅಧ್ಯಕ್ಷತೆಯನ್ನು ವಹಿಸಿಕೊಂಡ ಬಳಿಕ ದೇಶ ವಿದೇಶಗಳಲ್ಲಿ ಟ್ರಸ್ಟ್ ವಿಸ್ತರಿಸಿದೆ. ಶೀಘ್ರದಲ್ಲೇ ಕೆನಡಾ ಘಟಕ ಆರಂಭಗೊಳ್ಳಲಿದೆ“ ಎಂದರು. 

ವೇದಿಕೆಯಲ್ಲಿ ವಿಕೆ ಸಮೂಹ ಸಂಸ್ಥೆಗಳ ಸ್ಥಾಪಕ ಉದ್ಯಮಿ ಮಧ್ಯಗುತ್ತು ಕರುಣಾಕರ ಎಂ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಬಿಲ್ಲಾಡಿ ಅಶೋಕ್ ಶೆಟ್ಟಿ, ಪೂನಾ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಮುಂಬೈ ಹೋಟೆಲ್ ಉದ್ಯಮಿ ಕರ್ನಿರೆ ವಿಶ್ವನಾಥ್ ಶೆಟ್ಟಿ, ಸೀತಾರಾಮ್ ರೈ ಸವಣೂರು, ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್  ಮತ್ತಿತರರು ಉಪಸ್ಥಿತರಿದ್ದರು. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಕಾರ್ಯಕ್ರಮ‌ ನಿರ್ವಹಿಸಿದರು. ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ವಂದಿಸಿದರು.

—–

*ಸಮಲೋಚನಾ ಸಭೆಯಲ್ಲೇ ರೂ 1-00 ಕೋಟಿ ದೇಣಿಗೆ ಘೋಷಿಸಿದ ಶಶಿಧರ ಶೆಟ್ಟಿ ಬರೋಡ*

ಟ್ರಸ್ಟ್ ನ ಪ್ರಧಾನ ಸಂಚಾಲಕ ಶಶಿಧರ್ ಶೆಟ್ಟಿ ಬರೋಡ ಮಾತಾಡಿ, “ಪಟ್ಲ ಸತೀಶ್ ಶೆಟ್ಟಿಯವರು ಬಹಳಷ್ಟು ಕಷ್ಟಪಟ್ಟು ಯಕ್ಷಗಾನ ಕಲಾವಿದರಿಗಾಗಿ ಸಂಘಟನೆ ,

ಕರಾವಳಿಯ ಯಕ್ಷಗಾನ ಕಲೆಯನ್ನು  ಪ್ರಸ್ತುತ ಕಾಲಘಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಪಸರಿಸುತ್ತಿರುವ ಹಾಗೂ ತನ್ಮೂಲಕ ಯಕ್ಷಗಾನದ ಕಲಾವಿದರಿಗಲ್ಲದೆ ಇತರೇ ವಿವಿಧ ಪ್ರಕಾರದ ಅಶಕ್ತರ ಬಾಳಿಗೆ ಬೆಳಕಾಗಿ ಮೂಡಿಬಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ 10ನೇ ವರ್ಷದ ಪಟ್ಲ ಸಂಭ್ರಮ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ   ಸಮಾಜಕ್ಕೆ ಮಾದರಿಯಾಗುವಂತಹ ಕಾರ್ಯಕ್ರಮವಾಗಲಿ, ಕಾರ್ಯಕ್ರಮದ ಯಶಸ್ಸಿಗೆ ಗರಿಷ್ಠ ಮೊತ್ತದ ದೇಣಿಯನ್ನು ನೀಡಿ ಸಹಕರಿಸಲಾಗುವುದೆಂದು  

ಯಕ್ಷಧ್ರುವ ಪಟ್ಲ ಫೌಂಡೇಶನಿನ ಮಹಾದಾನಿಗಳಾದ ಶಶಿಧರ ಶೆಟ್ಟಿ ಬರೋಡ ದಶಮಾನೋತ್ಸವ ಕಾರ್ಯಕ್ರಮದ ಮೂಲಕ ನಮ್ಮ ಪಟ್ಲ ಫೌಂಡೇಶನ್ನು ಸುಭಧ್ರಗೊಳಿಸುವ ಮತ್ತು ಅದರ ಮುಂದಿನ ಯೋಜನಾ ಕಾರ್ಯಕ್ರಮಗಳನ್ನು ನಿರಂತರವಾಗಿ ವ್ಯವಸ್ಥಿತ ರೀತಿಯಲ್ಲಿ ಮುಂದುವರಿಸುವ ನಿಟ್ಟಿನಲ್ಲಿ ಸುಮಾರು 10-00 ಕೋಟಿ ಮೊತ್ತದ ದೇಣಿಗೆಯನ್ನು ಮುಂಗಡವಾಗಿ ಸಂಗ್ರಹಿಸುವುದು ಉತ್ತಮವೆಂದು ತಿಳಿಸಿ ಪ್ರಥಮ ಹೆಜ್ಜೆಯಾಗಿ ತಾನು ರೂ 1-00 ಕೋಟಿ ಮೊತ್ತವನ್ನು ದೇಣಿಗೆಯ ರೂಪದಲ್ಲಿ ನೀಡುವುದಾಗಿ ಎಂದು ಘೋಷಣೆ ಮಾಡಿದರು.



Related posts

ನಿಟ್ಟೆ ಶಿಕ್ಷಣ ಟ್ರಸ್ಟ್‌ನ ಸಂಸ್ಥಾಪಕ ಎನ್ ವಿನಯ ಹೆಗ್ಡೆ ನಿಧನ

Mumbai News Desk

ಚಿತ್ರರಂಗದ ಮಿನುಗು ತಾರೆ ರೀಟಾ ಆರ್. ಅಂಚನ್ ವಿಧಿವಶ

Mumbai News Desk

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ

Mumbai News Desk

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಡಿ ಕಾಂಚನ್ ಗೆ ಶೇ 92.67 ಅಂಕ.

Mumbai News Desk

ಮಹಾರಾಷ್ಟ್ರ, ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ : ನ. 20 ರಂದು ರಾಜ್ಯದಲ್ಲಿ ಮತದಾನ

Mumbai News Desk