ಬಿಲ್ಲವಾಸ್ ದುಬೈ & ನಾರ್ದರ್ನ್ ಎಮಿರೇಟ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾನ್ವಿತರಿಗೆ ಸನ್ಮಾನ ಮತ್ತು ವೈದ್ಯಕೀಯ ನೆರವು ಹಸ್ತಾಂತರ ಸಮಾರಂಭ ಭಾನುವಾರ(ಆ.09) ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶ್ರೀಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ ಉದ್ಘಾಟಿಸಿ ಮಾತನಾಡಿ,ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವುದು ಹಾಗೂ ಅನಾರೋಗ್ಯ ಪೀಡಿತರಿಗೆ ವೈದ್ಯಕೀಯ ನೆರವು ಒದಗಿಸುವುದು ಪುಣ್ಯದ ಕೆಲಸ. ಫಲಾನುಭವಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಶ್ರೀಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಗಳ ಮಾಜಿ ಡೀನ್ ಡಾ.ಉಮ್ಮಪ್ಪ ಪೂಜಾರಿ ಪಿ.
ಮಾತನಾಡಿ, ಬಿಲ್ಲವಾಸ್ ದುಬೈ ಆ್ಯಂಡ್ ನಾರ್ದರ್ನ್ ಎಮಿರೇಟ್ಸ್ ಚಾರಿಟೇಬಲ್ ಟ್ರಸ್ಟ್ ಕಷ್ಟದಲ್ಲಿರುವವರಿಗೆ ನೆರವಾಗುವ ವಿಚಾರದಲ್ಲಿ ದೊಡ್ಡ ಕ್ರಾಂತಿಯನ್ನು ಮಾಡಿವೆ. ವಿದ್ಯಾರ್ಥಿಗಳು ಕೇವಲ ಅಂಕ ಪಡೆಯುವತ್ತ ಗಮನಹರಿಸದೆ, ತಮ್ಮ ಪ್ರತಿಭೆ, ಕೌಶಲ್ಯ ಬೆಳೆಸುವತ್ತ ಕೂಡ ಗಮನ ಹರಿಸಬೇಕು. ಗುರು ಹಿರಿಯರನ್ನು ಗೌರವಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿಲ್ಲವಾಸ್ ಫ್ಯಾಮಿಲಿ ದುಬೈ ಅಧ್ಯಕ್ಷ ದೀಪಕ್ ಎಸ್.ಪಿ. ಮಾತನಾಡಿ, ಕೊಲ್ಲಿ ರಾಷ್ಟ್ರಗಳಲ್ಲಿ ಈಗ ಪರಿಸ್ಥಿತಿ ಚೆನ್ನಾಗಿಲ್ಲದಿದ್ದರೂ ವಿದ್ಯಾರ್ಥಿಗಳಿಗೆ ನೆರವು ನೀಡುತ್ತಿರುವುದನ್ನು ನಿಲ್ಲಿಸ ಬಾರದೆಂದು ನಿರ್ಧರಿಸಿ ಈ ವರ್ಷ ಕೂಡಾ ವಿದ್ಯಾರ್ಥಿ ವೇತನ ವಿತರಿಸಿದ್ದೇವೆ. ಈ ಕಾರ್ಯಕ್ರಮ ನಿರಂತರವಾಗಿ ಮುಂದುವರಿಸುವ ಉದ್ದೇಶ ನಮ್ಮದು. ಕುದ್ರೋಳಿ ಕ್ಷೇತ್ರದಲ್ಲಿ ಇದುವರೆಗೆ ವಿದ್ಯಾರ್ಥಿವೇತನ ಸಹಿತ ವಿವಿಧ ಉದ್ದೇಶಗಳಿಗಾಗಿ ಒಟ್ಟು 2 ಕೋಟಿ 30 ಲಕ್ಷ ರೂಪಾಯಿಗೂ ಅಧಿಕ ಮೊತ್ತವನ್ನು ವಿತರಿಸಿದ್ದೇವೆ ಎಂದರು.
ಕುದ್ರೋಳಿ ಕ್ಷೇತ್ರದ ಟ್ರಸ್ಟಿ ಕೃತಿನ್ ಡಿ. ಅಮೀನ್, ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸೀತಾರಾಮ ಎಚ್. ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ,ವಿವಿಧ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ 11 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಸಾಧಕಿ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಬಹುಮುಖ ಪ್ರತಿಭೆ ಶ್ರೀಜಾ ಸಿ.ಕೋಟ್ಯಾನ್ ಅವರನ್ನು ಗೌರವಿಸಲಾಯಿತು. ಅಶಕ್ತರಿಗೆ ವೈದ್ಯಕೀಯ ನೆರವು ವಿತರಿಸಲಾಯಿತು.




