September 13, 2026
Mumbai News Kannada
ಕರಾವಳಿ

ಕರಾವಳಿ ಅಭಿವೃದ್ಧಿಗೆ ಸೆ.18ರ ಸಂಪುಟ ಸಭೆಯಲ್ಲಿ ಮಹತ್ವದ ಪ್ರಸ್ತಾವನೆಗಳಿಗೆ ಆದ್ಯತೆ: ಯು.ಟಿ. ಖಾದರ್





ಮಂಗಳೂರು: ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಮೂಲಸೌಕರ್ಯ, ರಸ್ತೆ, ಕೈಗಾರಿಕೆ, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳ ಮಹತ್ವದ ಯೋಜನೆಗಳಿಗೆ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆದ್ಯತೆ ನೀಡಿ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.
ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಆಡಳಿತದ ಅಧಿಕಾರಿಗಳು, ಕೈಗಾರಿಕಾ ವಲಯದ ಪ್ರತಿನಿಧಿಗಳು, ಮೀನುಗಾರಿಕಾ ಸಂಘಟನೆಗಳ ಮುಖಂಡರು ಹಾಗೂ ಪ್ರವಾಸೋದ್ಯಮ ಉದ್ಯಮಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೈಗಾರಿಕಾ ವಿಸ್ತರಣೆಗೆ ಅಗತ್ಯವಿರುವ ಭೂಮಿಯ ಕೊರತೆಯಿರುವ ಕುರಿತು ಹಲವು ಮನವಿಗಳು ಬಂದಿವೆ. ಕೈಗಾರಿಕಾ ಅಭಿವೃದ್ಧಿಗೆ ಪೂರಕವಾಗಿ ಹೊಸ ಕೈಗಾರಿಕಾ ಪ್ರದೇಶಗಳನ್ನು ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಬೈಕಂಪಾಡಿ ಕೈಗಾರಿಕಾ ಪ್ರದೇಶದ ರಸ್ತೆ ಅಭಿವೃದ್ಧಿಗೆ ₹28 ಕೋಟಿ ಮೊತ್ತದ ಪ್ರಸ್ತಾವನೆಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದಕ್ಕೆ ಅಗತ್ಯ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ತರಬೇತಿ ಪಡೆಯುತ್ತಿರುವ ಅಪ್ರೆಂಟಿಸ್‌ಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಸಮೀಪದಲ್ಲೇ ಹಾಸ್ಟೆಲ್ ನಿರ್ಮಿಸುವ ಕುರಿತು ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೈಗಾರಿಕಾ ಪ್ರದೇಶದಲ್ಲಿ ತರಬೇತಿ ಪಡೆಯುವ ಯುವಕರಿಗೆ ವಸತಿ ಸಮಸ್ಯೆಯಾಗುತ್ತಿರುವುದನ್ನು ಕೆನರಾ ಸ್ಮಾಲ್ ಇಂಡಸ್ಟ್ರೀಸ್ ಅಸೋಸಿಯೇಷನ್‌ನ ಪದಾಧಿಕಾರಿಗಳು ಸಚಿವರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಈ ನಿರ್ದೇಶನ ನೀಡಲಾಗಿದೆ.
ತೊಕ್ಕೊಟ್ಟು–ಮುಡಿಪು–ಮೆಲ್ಕಾರ್ ರಸ್ತೆಯನ್ನು ಶಿಕ್ಷಣ, ಆರೋಗ್ಯ, ಧಾರ್ಮಿಕ ಹಾಗೂ ಐಟಿ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗುವ ಪ್ರಮುಖ ಕಾರಿಡಾರ್ ಆಗಿ ರೂಪಿಸುವ ಕುರಿತು ಪ್ರಸ್ತಾವನೆ ಸಿದ್ಧಪಡಿಸುವಂತೆ ಸಚಿವ ಖಾದರ್ ಅಧಿಕಾರಿಗಳಿಗೆ ಸೂಚಿಸಿದರು. ಈ ರಸ್ತೆಯನ್ನು ಬೆಂಗಳೂರು ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗಗಳೊಂದಿಗೆ ಜೋಡಿಸುವ ಮೂಲಕ ಕರಾವಳಿಯ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದರು.
ಮಂಗಳೂರು ಹಳೆ ಬಂದರಿನಲ್ಲಿ ದೋಣಿಗಳ ನಿಲುಗಡೆಗೆ ಅಗತ್ಯವಿರುವಷ್ಟು ಸ್ಥಳಾವಕಾಶವಿಲ್ಲದಿರುವುದು ಹಾಗೂ ದೊಡ್ಡ ದೋಣಿಗಳ ಸಂಚಾರದ ನಡುವೆ ಸಣ್ಣ ಮೀನುಗಾರಿಕಾ ದೋಣಿಗಳಿಗೆ ಎದುರಾಗುತ್ತಿರುವ ತೊಂದರೆಗಳನ್ನು ಮೀನುಗಾರಿಕಾ ಮುಖಂಡರಾದ ಚೇತನ್ ಮತ್ತು ಮೋಹನ್ ಬೆಂಗ್ರೆ ಸಭೆಯಲ್ಲಿ ಪ್ರಸ್ತಾಪಿಸಿದರು. ಕಸಬಾ ಬೆಂಗ್ರೆ, ಹೊಸಬೆಟ್ಟು, ತಣ್ಣೀರುಬಾವಿ ಹಾಗೂ ಕೋಟೆಪುರದಲ್ಲಿ ಮೀನುಗಾರಿಕಾ ಜೆಟ್ಟಿಗಳನ್ನು ನಿರ್ಮಿಸುವಂತೆ ಅವರು ಒತ್ತಾಯಿಸಿದರು. ಮೀನುಗಾರಿಕೆಯ ಸುಗಮತೆಗೆ ನದಿಗಳ ಹೂಳೆತ್ತುವ ಕಾಮಗಾರಿಗಳಿಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮಾತನಾಡಿ, ನವ ಮಂಗಳೂರು ಬಂದರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಸುಮಾರು 150 ಎಕರೆ ಭೂಮಿಯನ್ನು ಬಳಸಿಕೊಂಡು ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು. ಈ ಸಂಬಂಧ ಎನ್‌ಎಂಪಿಎ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗಿದೆ ಎಂದರು.
ಮಂಗಳೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಅಭಿವೃದ್ಧಿ, ಆನೆ ಶಿಬಿರ ಸ್ಥಾಪನೆ, ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ನಿಯಮಗಳ ಪರಿಷ್ಕರಣೆ ಹಾಗೂ ಕರಾವಳಿ ರಸ್ತೆಗಳ ಅಭಿವೃದ್ಧಿ ಸೇರಿದಂತೆ ವಿವಿಧ ಯೋಜನೆಗಳ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರಭಾರಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕೈಗಾರಿಕಾ ವಲಯದ ಪ್ರತಿನಿಧಿಗಳು, ಮೀನುಗಾರಿಕಾ ಮುಖಂಡರು ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಪ್ರತಿನಿಧಿಗಳು ಉಪಸ್ಥಿತರಿದ್ದರು.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ದ್ವಿತೀಯ ಪಿಯುಸಿ ಫಲಿತಾಂಶ : ಶಶಾಂಕ್ ಗೆ ಶೇ.94 ಅಂಕ.

Mumbai News Desk

ಮಂಗಳೂರಿನ ನಗರ ಸೇವಕ ಜಗದೀಶ್ ಶೆಟ್ಟಿ ಆತ್ಮ ಹತ್ಯೆಗೆ ಯತ್ನ.

Mumbai News Desk

ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 5 ಕೋಟಿ ರೂ. “ನೆರವು” ಕಾರ್ಯಕ್ರಮ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ. ಜಿಲ್ಲೆಯ ಅಧ್ಯಕ್ಷರಾಗಿ ಡಿ ಆರ್ ರಾಜು. ಕಾರ್ಯದರ್ಶಿಯಾಗಿ ಅರುಣ್ ಪ್ರಕಾಶ್ ಶೆಟ್ಟಿಯ ವರಿಗೆ ಅಧಿಕಾರ ಹಸ್ತಾಂತರ.

Mumbai News Desk

ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ.

Mumbai News Desk