ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಈ ಸಿನಿಮಾದ ಚಿತ್ರೀಕರಣದ ವೇಳೆ ಒಂದರ ಹಿಂದೊಂದರಂತೆ ಅವಘಡಗಳು ಸಂಭವಿಸುತ್ತಲೇ ಇವೆ. ಸಿನಿಮಾನಲ್ಲಿ ನಟಿಸಿದ್ದ ಮೂವರು ಈಗಾಗಲೇ ಪ್ರಾಣ ಬಿಟ್ಟಿದ್ದಾರೆ.
ಎರಡು ದಿನಗಳ ಹಿಂದೆ ಸಹ ಕಲಾವಿದ ವಿಜು ವಿಕೆ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಇದೀಗ ಚಿತ್ರೀಕರಣದ ವೇಳೆ ದೋಣಿ ಮಗುಚಿ ಬಿದ್ದ ಘಟನೆ ನಡೆದಿದೆ.
ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ‘ಕಾಂತಾರ’-1 ಚಿತ್ರದ ಕೊನೆ ಹಂತದ ಚಿತ್ರೀಕರಣ ನಡೆಯುತ್ತಿದೆ. ಶನಿವಾರ ಚಿತ್ರೀಕರಣ ನಡೆಯುತ್ತಿದ್ದ ವೇಳೆ ರಿಷಬ್ ಶೆಟ್ಟಿ ಸೇರಿ 30 ಜನ ಕಲಾವಿದರಿದ್ದ ದೋಣಿ ಇದ್ದಕ್ಕಿದ್ದಂತೆ ಮಗುಚಿ ಬಿದ್ದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಕಲಾವಿದರು, ತಂತ್ರಜ್ಞರು ಎಲ್ಲರೂ ಈಜಿ ದಡ ಸೇರಿದ್ದಾರೆ. ಬೋಟ್ನಲ್ಲಿದ್ದವರು ಬಚಾವಾದರೂ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿದೆ ಎಂದು ತಿಳಿದುಬಂದಿದೆ.
ಘಟನೆ ಬೆನ್ನಲ್ಲೇ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಸಲಾಗಿದ್ದು, ಒಂದರ ಹಿಂದೆ ಒಂದರಂತೆ ಘಟನೆ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡ ಇದೀಗ ಭಯಭೀತಗೊಂಡಿದೆ ಎನ್ನಲಾಗಿದೆ. ಈ ಹಿಂದೆ ರಿಷಬ್ ಶೆಟ್ಟಿಗೆ ಮಂಗಳೂರಿನ ಕದ್ರಿ ಬಾರೆಬೈಲ್ ಪಂಜುರ್ಲಿ ದೈವ ಎಚ್ಚರಿಕೆ ನೀಡಿತ್ತು. ಅದರ ಬೆನ್ನಲ್ಲೇ ಮತ್ತಷ್ಟು ಅವಘಡಗಳ ಸಂಭವಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.




