ಸುರತ್ಕಲ್ನ ಬಾರ್ ಒಂದರಲ್ಲಿ ಎರಡು ಗುಂಪುಗಳ ನಡುವೆ ನಡೆದ ವಾಗ್ವಾದವು ವಿಕೋಪಕ್ಕೆ ತಿರುಗಿ, ಓರ್ವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಗುರುವಾರ ರಾತ್ರಿ ನಡೆದ ಈ ಘಟನೆಯಲ್ಲಿ ಮುಕ್ಷಿದ್ ಎಂಬುವವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ಗುರುರಾಜ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ತಲೆಮರೆಸಿಕೊಂಡಿರುವ ಅವರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
ಮುಕ್ಷಿದ್, ನಿಜಾಮ್ ಮತ್ತು ಇತರ ಇಬ್ಬರು ಸ್ನೇಹಿತರು ದೀಪಕ್ ಬಾರ್ಗೆ ತೆರಳಿ ಮದ್ಯ ಸೇವಿಸುತ್ತಿದ್ದರು. ಇದೇ ವೇಳೆ, ಅಲ್ಲಿಗೆ ಬಂದಿದ್ದ ನಾಲ್ವರು ಅಪರಿಚಿತ ವ್ಯಕ್ತಿಗಳ ಜೊತೆ ಅವರಿಗೆ ವಾಗ್ವಾದ ಶುರುವಾಗಿದೆ. ಬಾರ್ನಿಂದ ಹೊರಬಂದ ನಂತರವೂ ಎರಡೂ ಗುಂಪುಗಳ ನಡುವೆ ಜಗಳ ಮುಂದುವರಿದಿದೆ.
ಈ ಸಂದರ್ಭದಲ್ಲಿ, ಆರೋಪಿಗಳಲ್ಲಿ ಒಬ್ಬ ಚಾಕುವಿನಿಂದ ಮುಕ್ಷಿದ್ ಅವರ ಹೊಟ್ಟೆಗೆ ಮತ್ತು ಕಿವಿಯ ಸಮೀಪ ಇರಿದಿದ್ದಾನೆ. ತಡೆಯಲು ಬಂದ ಸ್ನೇಹಿತ ನಿಜಾಮ್ ಅವರ ಕೈಗೂ ಗಾಯವಾಗಿದೆ. ಅದೃಷ್ಟವಶಾತ್ ಗಾಯ ಆಳವಾಗಿರದ ಕಾರಣ ಮುಕ್ಷಿದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಅಪರಿಚಿತ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307ರ ಅಡಿಯಲ್ಲಿ (ಕೊಲೆ ಯತ್ನ) ಪ್ರಕರಣ ದಾಖಲಿಸಲಾಗಿದೆ.
ರಾತ್ರಿಯೇ ಕಾರ್ಯಪ್ರವೃತ್ತರಾದ ಪೊಲೀಸರ ವಿಶೇಷ ತಂಡಗಳು ಆರೋಪಿಗಳನ್ನು ಗುರುತಿಸುವಲ್ಲಿ ಯಶಸ್ವಿಯಾಗಿವೆ. ಸುರತ್ಕಲ್ ಠಾಣೆಯ ರೌಡಿ ಶೀಟರ್ ಹಾಗೂ ಬಜರಂಗದಳದಲ್ಲಿ ಸಕ್ರಿಯನಾಗಿರುವ ಗುರುರಾಜ್, ಆತನ ಸ್ನೇಹಿತ ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳು ಎಂದು ಗುರುತಿಸಲಾಗಿದೆ.
ಅನ್ಯಕೋಮಿನವರಿಂದ ಚೂರಿ ಇರಿತ, ಇಬ್ಬರಿಗೆ ಗಾಯ
ಸುರತ್ಕಲ್ನ ಬಾರ್ ಒಂದರಲ್ಲಿ ಎರಡು ಗುಂಪುಗಳ ನಡುವೆ ನಡೆದ ವಾಗ್ವಾದವು ವಿಕೋಪಕ್ಕೆ ತಿರುಗಿ, ಓರ್ವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಗುರುವಾರ ರಾತ್ರಿ ನಡೆದ ಈ ಘಟನೆಯಲ್ಲಿ ಮುಕ್ಷಿದ್ ಎಂಬುವವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ಗುರುರಾಜ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ತಲೆಮರೆಸಿಕೊಂಡಿರುವ ಅವರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ
ಆರೋಪಿಗಳು ತಲೆಮರೆಸಿಕೊಂಡಿದ್ದ ಸ್ಥಳಕ್ಕೆ ಪೊಲೀಸರು ರಾತ್ರಿ ದಾಳಿ ನಡೆಸಿದರಾದರೂ, ಅಷ್ಟರಲ್ಲಾಗಲೇ ಅವರು ಅಲ್ಲಿಂದ ಪರಾರಿಯಾಗಿದ್ದರು. ಆರೋಪಿಗಳ ಪತ್ತೆಗಾಗಿ ಪೊಲೀಸರ ತಂಡಗಳು ಶೋಧ ಕಾರ್ಯ ಮುಂದುವರಿಸಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ತಿಳಿಸಿವೆ. ಶುಕ್ರವಾರ ಬೆಳಿಗ್ಗೆ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಚುರುಕುಗೊಂಡಿದೆ ಎಂದು ನಗರ ಪೊಲೀಸ್ ಆಯುಕ್ತರು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೋಮು ಸಂಘರ್ಷದ ಘಟನೆಗಳ ಬಳಿಕ ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಜಾರಿಗೊಳಿಸಿತ್ತು. ಪರಿಣಾಮ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಸಂಪೂರ್ಣ ನಿಂತೇ ಹೋಗಿದ್ದವು. ಇದೀಗ ಮತ್ತೆ ಇಂಥಹದ್ದೇ ಘಟನೆಯೊಂದಕ್ಕೆ ಸುರತ್ಕಲ್ ಸಾಕ್ಷಿಯಾಗಿದೆ.




