ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಗಳ ಸ್ಥಾಪಕರು ಹಾಗೂ ಶಿಕ್ಷಣ ತಜ್ಞರಾದ ಕೆ. ಪಿ. ಆಚಾರ್ಯ (78) ಅವರು ಸೋಮವಾರ ಮುಂಜಾನೆ ನಿಧನರಾದರು. ಕಾಪು ಪರಿಸರದಲ್ಲಿ ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿದ್ದ ಇವರು ಕಳೆದ ಮೂರು ದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅನಂತರಾಜ್ ಚಾರಿಟೇಬಲ್ ಟ್ರಸ್ಟ್ ಮೂಲಕ ಕಾಪುವಿನಲ್ಲಿ ಪ್ರಥಮ ಬಾರಿಗೆ ಐಸಿಎಸ್ಇ (ICSE) ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ಕೇವಲ ಶಿಕ್ಷಣ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗದೆ, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕಾಪುವಿನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಹೊಸ ಮಾರಿಗುಡಿ ಹಾಗೂ ಇನ್ನಿತರ ಸ್ಥಳೀಯ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳಲ್ಲಿ ಅವರು ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದರು. ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ಮೂಲಕ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದ್ದರು.
ಇವರ ನಿಧನಕ್ಕೆ ವಿವಿಧ ಗಣ್ಯರು ಹಾಗೂ ಹಳೆ ವಿದ್ಯಾರ್ಥಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಪುವಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ನಿರಂತರ ಪ್ರೋತ್ಸಾಹ ನೀಡುತ್ತಿದ್ದ ಕೆ. ಪಿ. ಆಚಾರ್ಯ ಅವರ ನಿಧನಕ್ಕೆ ಕಾಪು ಕ್ಷೇತ್ರದ ರಾಜಕೀಯ, ಧಾರ್ಮಿಕ, ಸಾಮಾಜಿಕ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.




