July 23, 2026
Mumbai News Kannada
ಸುದ್ದಿ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಎನ್ಐಎ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಶಾರೀಕ್







ನಾಲ್ಕು ವರ್ಷಗಳ ಹಿಂದೆ ಮಂಗಳೂರಿನ ಹೊರವಲಯದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಮೊಹಮ್ಮದ್ ಶಾರೀಕ್ ತಾನು ಕೃತ್ಯವೆಸಗಿರುವುದಾಗಿ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಈ ಸಂಬಂಧ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನ ಎನ್ಐಎ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ.

ಪ್ರಕರಣ ಸಂಬಂಧ 2024ರಲ್ಲಿ ಶಾರೀಕ್, ಸೈಯದ್ ಯಾಸೀನ್ ವಿರುದ್ಧ ನ್ಯಾಯಾಲಯಕ್ಕೆ ಎನ್ಐಎ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಶಾರೀಕ್ ತಾನು ನಿರಾಪರಾಧಿ ಎಂದು ಹೇಳಿಕೆ ನೀಡಿ ತನ್ನ ಮೇಲಿನ ಆರೋಪವನ್ನ ತಳ್ಳಿ ಹಾಕಿದ್ದ. ಈ ಮಧ್ಯೆ 2025ರ ಡಿಸೆಂಬರ್ ನಲ್ಲಿ ನ್ಯಾಯಾಲಯಕ್ಕೆ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿದ್ದ. ನನ್ನ ವಿರುದ್ಧ ಎನ್ಐಎ ತನಿಖಾಧಿಕಾರಿಗಳು ಚಾರ್ಜ್ ಶೀಟ್​​ನಲ್ಲಿ ನಮೂದಿಸಿರುವ ಆರೋಪಗಳು ಸತ್ಯವಾಗಿದ್ದು, ಕುಕ್ಕರ್​​ನಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಇಟ್ಟು ಸ್ಫೋಟಕ್ಕೆ ಕಾರಣನಾಗಿರುವೆ. ನನಗೆ ಈಗ ಪಶ್ಚಾತಾಪವಾಗಿದೆ. ಕಾನೂನು ಪ್ರಕಾರ ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರ್ಜಿಯಲ್ಲಿ ಉಲ್ಲೇಖಿಸಿದ್ದ. ಮೂರು ತಿಂಗಳ ವಿಚಾರಣೆ ಬಳಿಕ ನ್ಯಾಯಾಲಯವು ಶಂಕಿತನ ಅರ್ಜಿಯನ್ನ ಮಾನ್ಯ ಮಾಡಿದೆ.

2022ರ ನ.19ರಂದು ಸಂಜೆ 4.40 ಸುಮಾರಿಗೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟೋದಲ್ಲಿ ಶಾರೀಖ್ ತೆರಳುವಾಗ (ಐಇಡಿ) ಕುಕ್ಕರ್ ಸ್ಫೋಟಗೊಂಡಿತ್ತು. ಸ್ಫೋಟದ ರಭಸಕ್ಕೆ ಶಂಕಿತನ ಜೊತೆ ಆಟೋ ಚಾಲಕ ಸಹ ಗಂಭೀರ ಗಾಯಗೊಂಡಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಶಂಕಿತನನ್ನ ಬಂಧಿಸಿದ್ದರು. ಕೃತ್ಯದ ಹಿಂದೆ ಐಸಿಸ್ ನಂಟು ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ (ಯುಎಪಿಎ) ಪ್ರಕರಣ ದಾಖಲಿಸಿ ಎನ್ಐಎ ತನಿಖೆ ಕೈಗೊಂಡಿತ್ತು. ಸದ್ಯ ಕುಕ್ಕರ್ ಬಾಂಬ್ ಸ್ಫೋಟದ ಹಿಂದೆ ತನ್ನ ಪಾತ್ರವಿರುವುದಾಗಿ ಎನ್ಐಎ ವಿಶೇಷ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಶಾರೀಕ್, ಐಸಿಎಸ್ ಹಾಗೂ ಸಿಮಿ ಉಗ್ರ ಸಂಘಟನೆಗಳಿಂದ ಪ್ರೇರಿತನಾಗಿದ್ದ. ಶಿವಮೊಗ್ಗ ಐಸಿಸ್ ಮಾಡ್ಯುಲ್ ಸದಸ್ಯನಾಗಿದ್ದ. ಈತ 2020ರಲ್ಲಿ ಮಂಗಳೂರಿನ ಗೋಡೆ ಬರಹ ಹಾಗೂ ಶಿವಮೊಗ್ಗ ತುಂಗಾ ನದಿ ತೀರದಲ್ಲಿ ನಡೆಸಿದ್ದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣಗಳ ಆರೋಪಿಯಾಗಿದ್ದಾನೆ. ಸದ್ಯ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಮಾತ್ರ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ.

ಕರ್ನಾಟಕದ ಧರ್ಮಸ್ಥಳ, ಕದ್ರಿ ಮಂಜುನಾಥ ದೇವಾಲಯ ಸೇರಿದಂತೆ ದಕ್ಷಿಣ ಭಾರತದ ದೇವಾಲಯಗಳಲ್ಲಿ ಬಾಂಬ್ ಸ್ಫೋಟಗೊಳಿಸುವುದು ಶಂಕಿತ ಉಗ್ರರ ಹುನ್ನಾರವಾಗಿತ್ತು. ಇದೇ ಭಾಗವಾಗಿ ಕುಕ್ಕರ್​​ನಲ್ಲಿ ಇಎಲ್​ಡಿ ಇಟ್ಟು ಟೈಮರ್ ಫಿಕ್ಸ್ ಮಾಡಲಾಗಿತ್ತು. 90 ನಿಮಿಷಗಳ ಫಿಕ್ಸ್ ಮಾಡುವ ಬದಲು 9 ನಿಮಿಷಕ್ಕೆ ತಪ್ಪಾಗಿ ನಿಗದಿಪಡಿಸಿದ್ದರಿಂದ ಆಟೋದಲ್ಲಿ ತೆರಳುವಾಗ ಮಾರ್ಗ ಮಧ್ಯೆ ಸ್ಫೋಟಗೊಂಡಿತ್ತು. ಪ್ರಕರಣದ ಎರಡನೇ ಆರೋಪಿ ಸೈಯದ್ ಯಾಸೀನ್ ಬಾಂಬ್ ತಯಾರಿಕೆಗೆ ಅಗತ್ಯವಾದ ಉಪಕರಣಗಳನ್ನ ಪೂರೈಸಿದ ಆರೋಪದಡಿ ಬಂಧಿಸಲಾಗಿತ್ತು.



Related posts

ಅವಿಭಜಿತ ಜಿಲ್ಲೆಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

Mumbai News Desk

ಮುಂಬೈ : ಥಾಣೆಯಲ್ಲಿ ಪೈಪ್‌ಲೈನ್ ಸೋರಿಕೆ: ಏಪ್ರಿಲ್ 11 ರಿಂದ 24 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತ

Mumbai News Desk

ತೆಂಕು ತಿಟ್ಟು ಯಕ್ಷಗಾನದ ಅಗ್ರಮಾನ್ಯ ಭಾಗವತರಾದ ದಿನೇಶ್ ಅಮ್ಮಣ್ಣಾಯರು ಇನ್ನಿಲ್ಲ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ ‘ಬ್ಯಾಂಕೊ ಬ್ಲೂ ರಿಬ್ಬನ್- 2023- 2024 ಪ್ರಶಸ್ತಿ

Mumbai News Desk

ಥಾಣೆ ನೇತ್ರಾವತಿ ಎಸ್.ಅಮೀನ್ ನಿಧನ.

Mumbai News Desk

ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ ಆಕಾಶ್ : ಲಿಯೋ ಕ್ಲಬ್ ಮಂಗಳಾದೇವಿ ವತಿಯಿಂದ ಸನ್ಮಾನ

Mumbai News Desk