ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಸೋಮವಾರ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಕಾಕರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿ, ಸರಣಿ ಮುಖಭಂಗ ಮಾಡಿರುವ ಘಟನೆ ನಡೆದಿದೆ.
ಇತ್ತೀಚೆಗೆ ನಡೆದ ನೀಟ್ ಯುಜಿ (NEET UG) ಮತ್ತು ಸಿಬಿಎಸ್ಇ (CBSE) ಪರೀಕ್ಷೆಗಳ ಅಕ್ರಮಗಳನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ವತಿಯಿಂದ ಜೈಪುರದ ಶಹೀದ್ ಸ್ಮಾರಕದಲ್ಲಿ ಶಾಂತಿಯುತ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ವೇಳೆ ಅಭಿಜೀತ್ ದೀಪ್ಕೆ ಅವರನ್ನು ಬೆಂಬಲಿಗರು ಹೆಗಲ ಮೇಲೆ ಹೊತ್ತು ಸಾಗುತ್ತಿದ್ದಾಗ, ಜನಸಂದಣಿಯಿಂದ ನುಗ್ಗಿದ ಕೆಲವರು ದಿಢೀರನೆ ಅವರ ಸ್ಕಾರ್ಫ್ ಹಿಡಿದು ಕೆಳಗೆ ಎಳೆದಿದ್ದಾರೆ. ಬಳಿಕ ಅವರ ಮೇಲೆ ಮುಖಕ್ಕೆ ಹಲವು ಬಾರಿ ಹೊಡೆದಿದ್ದಾರೆ.
ಈ ಘಟನೆಯಿಂದಾಗಿ ಸ್ಥಳದಲ್ಲಿ ತೀವ್ರ ಗೊಂದಲ ಮತ್ತು ಗದ್ದಲದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಕಾರ್ಯಪ್ರವೃತ್ತರಾದ ದೀಪ್ಕೆ ಬೆಂಬಲಿಗರು ಹಲ್ಲೆಕೋರರನ್ನು ಹಿಡಿದು ಥಳಿಸಿದ್ದು, ಬಳಿಕ ಸ್ಥಳೀಯ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಈ ಹಲ್ಲೆಗೆ ಸಂಬಂಧಿಸಿದಂತೆ ಜೈಪುರ ಪೊಲೀಸರು ಇಬ್ಬರು ಶಂಕಿತ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ದೈಹಿಕ ಹಲ್ಲೆಯ ನಡುವೆಯೂ ಪ್ರತಿಭಟನಾಕಾರರು ಆಡಳಿತಾತ್ಮಕ ಭ್ರಷ್ಟಾಚಾರದ ವಿರುದ್ಧ ಫಲಕಗಳನ್ನು ಪ್ರದರ್ಶಿಸಿ, ಘೋಷಣೆಗಳನ್ನು ಕೂಗುವುದನ್ನು ಮುಂದುವರಿಸಿದರು. ಘಟನೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅಭಿಜೀತ್ ದೀಪ್ಕೆ, ಈ ದಾಳಿಗೆ ಹೆದರುವುದಿಲ್ಲ ಎಂದು ತಿಳಿಸಿದ್ದು, ನಾಗ್ಪುರದ ಸಂವಿಧಾನ ಚೌಕ್ನಲ್ಲಿ ತಮ್ಮ ಮುಂದಿನ ಶಾಂತಿಯುತ ಪ್ರತಿಭಟನಾ ಅಭಿಯಾನ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಹಲ್ಲೆಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.




