
ಇನ್ನಂಜೆಯ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ದಾಸ ಭವನದಲ್ಲಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತ ದಿವಂಗತ ಬಿ. ಜಯಂತ್ ಪಡುಬಿದ್ರಿ ಸಂಸ್ಮರಣೆ ಹಾಗೂ ದತ್ತಿನಿಧಿ ವಿತರಣಾ ಸಮಾರಂಭವು ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸೋದೆ ವಾದಿರಾಜ ಮಠ ಎಜ್ಯುಕೇಶನ್ ಟ್ರಸ್ಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಐತಾಳ್ ಅವರು ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಬರೀ ಪಠ್ಯಕ್ಕೆ ಸೀಮಿತವಾಗದೆ ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು, ಆ ಮೂಲಕ ಜಗತ್ತಿನ ವಿದ್ಯಮಾನಗಳನ್ನು ಅರಿತು ಜ್ಞಾನವಂತರಾಗಿ ಭವಿಷ್ಯವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಹಿರಿಯ ಜಾನಪದ ಚಿಂತಕ ಡಾ. ವೈ. ಎನ್. ಶೆಟ್ಟಿ ಅವರು ದಿ. ಜಯಂತ್ ಪಡುಬಿದ್ರಿ ಅವರ ಸ್ಮರಣಾರ್ಥ ನೀಡಲಾಗುವ ದತ್ತಿನಿಧಿ ಪ್ರಶಸ್ತಿಯನ್ನು ವಿತರಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮ ಕ್ಷೇತ್ರವು ದೊಡ್ಡ ಮಟ್ಟದಲ್ಲಿ ವಿಸ್ತಾರಗೊಳ್ಳುತ್ತಿದ್ದು, ಸಾಂಪ್ರದಾಯಿಕ ಮಾಧ್ಯಮಗಳಿಗೆ ಸಾಮಾಜಿಕ ಮಾಧ್ಯಮಗಳು ಕಠಿಣ ಪೈಪೋಟಿ ನೀಡುತ್ತಿವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಬಳಿಕ “ಪತ್ರಿಕೋದ್ಯಮ ಮತ್ತು ವಿದ್ಯಾರ್ಥಿಗಳ ಪಾತ್ರ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ವಿಜಯಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ಜಾನ್ ಡಿಸೋಜ ಕುಂದಾಪುರ ಅವರು, ವಿದ್ಯಾರ್ಥಿಗಳು ಗ್ರಂಥಾಲಯಗಳ ಸದುಪಯೋಗ ಪಡೆದು ಪುಸ್ತಕಗಳನ್ನು ಓದುವ ಮೂಲಕ ಬದುಕಿನ ಪ್ರಮುಖ ಪಾಠಗಳನ್ನು ಕಲಿಯಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿನಿ ಮಂಗಳ ಶಿರ್ವ ಪದವು ಅವರಿಗೆ ‘ದತ್ತಿನಿಧಿ’ ಹಾಗೂ ಕಾಲೇಜಿನ ಅರ್ಹ ವಿದ್ಯಾರ್ಥಿಗಳಿಗೆ ‘ವಿದ್ಯಾರ್ಥಿ ವೇತನ’ವನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.
ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಮೀದ್ ಪಡುಬಿದ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ, ಕಾರ್ಯದರ್ಶಿ ಸುರೇಶ್ ಎರ್ಮಾಳು ಹಾಗೂ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ಪ್ರಭು ಉಪಸ್ಥಿತರಿದ್ದರು. ಸಂಘದ ಜಿಲ್ಲಾ ಸಮಿತಿ ಸದಸ್ಯ ಹರೀಶ್ ಹೆಜಮಾಡಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ ಅವರು ಅತಿಥಿಗಳನ್ನು ಸ್ವಾಗತಿಸಿದರೆ, ಪ್ರಕಾಶ ಸುವರ್ಣ ಕಟಪಾಡಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಕೊನೆಯಲ್ಲಿ ಕೋಶಾಧಿಕಾರಿ ಸಂತೋಷ್ ಕಾಪು ಅವರು ನೆರೆದಿದ್ದ ಸರ್ವರಿಗೂ ಧನ್ಯವಾದ ಸಮರ್ಪಿಸಿದರು.




