
ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬದ ಅಂಗವಾಗಿ ಈ ಬಾರಿ ಜಾನಪದ ಕ್ರೀಡೆ ಕಂಬಳ ಕೂಟವನ್ನು ನಡೆಸುವ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿ ಮಹತ್ವದ ಪೂರ್ವಭಾವಿ ಸಭೆ ಜರುಗಿತು. ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾದ ಚಂದ್ರಹಾಸ ಸಾದು ಸನಿಲ್, ಕಂಬಳ ಅಸೋಸಿಯೇಷನ್ ಪದಾಧಿಕಾರಿಗಳಾದ ವಿಜಯ ಕುಮಾರ್ ಕಂಗಿನಮನೆ, ಲೋಕೇಶ್ ಶೆಟ್ಟಿ ಮುಚ್ಚೂರುಕಲ್ಕುಡೆ, ಉದಯ ಕುಮಾರ್ ಮುನಿಯಾಲ್, ಪಿ. ಆರ್. ಶೆಟ್ಟಿ ಕೂಲೂರು ಪೊಯೆಲ್ ಹಾಗೂ ನವೀನ್ಚಂದ್ರ ಆಳ್ವ ತಿರುವೈಲು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಸಭೆಯ ಬಳಿಕ ಕಂಬಳ ಸಮಿತಿಯ ನಿಯೋಗವು ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್, ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್. ಸಿ. ಮಹದೇವಪ್ಪ ಹಾಗೂ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿತು. ಕರಾವಳಿಯ ಹೆಮ್ಮೆಯ ಸಂಸ್ಕೃತಿಯಾದ ಕಂಬಳವನ್ನು ಮೈಸೂರು ದಸರಾದಲ್ಲಿ ಅತ್ಯಂತ ಯಶಸ್ವಿಯಾಗಿ, ಶಿಸ್ತುಬದ್ಧವಾಗಿ ಮತ್ತು ವೈಭವೋಪೇತವಾಗಿ ಆಯೋಜಿಸುವ ನಿಟ್ಟಿನಲ್ಲಿ ಸಚಿವರೊಂದಿಗೆ ಸಮಾಲೋಚನೆ ನಡೆಸಿ, ಅಗತ್ಯ ಸಹಕಾರ ನೀಡುವ ಕುರಿತು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.






